ಭ್ರಷ್ಟಾಚಾರ ಆರೋಪ ಹಿನ್ನೆಲೆ ಬಾಗೆ ಗ್ರಾಮಪಂಚಾಯಿತಿ ಪಿಡಿಓ ಅಮಾನತ್ತಿಗೆ ಆಗ್ರಹ
ಕ್ರಮ ಕೈಗೊಳ್ಳದಿದ್ದರೆ ಅನಿರ್ಧಿಷ್ಟಾವಧಿ ಧರಣಿ ಎಚ್ಚರಿಕೆ
ಸಕಲೇಶಪುರ: ತಾಲ್ಲೂಕಿನ ಬಾಗೆ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿನ್ನಸ್ವಾಮಿ ಅವರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆ ತಕ್ಷಣವೇ ಸೇವೆಯಿಂದ ಅಮಾನತ್ತು ಮಾಡಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ವೇದಿಕೆಯ ಮುಖಂಡರು, 15ನೇ ಹಣಕಾಸು ಆಯೋಗದ ಅನುದಾನ, ವರ್ಗ–1 ಮತ್ತು ವರ್ಗ–2 ಖಾತೆಗಳ ಹಣ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪರಿಹಾರಧನ ದುರ್ಬಳಕೆ ಮಾಡಿಕೊಂಡಿರುವ ಆರೋಪಗಳಿವೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು 04-10-2025ರಂದು ನಿಯಮ 11(5)(ಸಿ) ಅನ್ವಯ ಇಲಾಖಾ ವಿಚಾರಣೆ ನಡೆಸುವಂತೆ ಆದೇಶ ನೀಡಿದ್ದರೂ, ಇಂದಿಗೂ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಒಂದು ವರ್ಷಕ್ಕೂ ಮುನ್ನವೇ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕಳೆದ ನಾಲ್ಕು ತಿಂಗಳ ಹಿಂದೆ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದರೂ, ಅಧಿಕಾರಿಗಳಿಂದ ಸ್ಪಷ್ಟ ಕ್ರಮವಾಗದಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ ಎಂದು ವೇದಿಕೆ ಆರೋಪಿಸಿದೆ.
ಈ ಕುರಿತು ಮಾತನಾಡಿದ ಸಕಲೇಶಪುರ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಗಗನ್ ಹಾಡ್ಲಹಳ್ಳಿ, “ಸಾರ್ವಜನಿಕ ಹಣದ ದುರ್ಬಳಕೆ ಕುರಿತ ಗಂಭೀರ ಆರೋಪಗಳಿರುವ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯನ್ನು ತಕ್ಷಣ ಅಮಾನತ್ತು ಮಾಡಿ ನ್ಯಾಯಸಮ್ಮತ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು. ಇಲ್ಲವಾದರೆ ತಾಲ್ಲೂಕು ಪಂಚಾಯಿತಿ ಕಚೇರಿ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸಲು ವೇದಿಕೆ ಸಜ್ಜಾಗಿದೆ” ಎಂದು ಎಚ್ಚರಿಸಿದರು.
ಹಾಸನ ಜಿಲ್ಲಾ ಕರವೇ ಪ್ರಧಾನ ಕಾರ್ಯದರ್ಶಿ ರಘು ಪಾಳ್ಯ ಮಾತನಾಡಿ, ಸಾರ್ವಜನಿಕ ಹಿತದೃಷ್ಟಿಯಿಂದ ಸಂಬಂಧಿತ ಅಧಿಕಾರಿಗಳು ತ್ವರಿತ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಕಲೇಶಪುರ ಕರ್ನಾಟಕ ರಕ್ಷಣಾ ವೇದಿಕೆ ಘಟಕದ ಅಧ್ಯಕ್ಷ ಸುನಿಲ್, ಪ್ರಧಾನ ಕಾರ್ಯದರ್ಶಿ ಜೈಕುಮಾರ್, ರೈತ ಘಟಕದ ಅಧ್ಯಕ್ಷ ವಸಂತ್ ಬೊಮ್ಮನಕೆರೆ, ನಗರ ಘಟಕದ ಅಧ್ಯಕ್ಷ ಸಿದ್ದಾರ್ಥ್ ಪಟೇಲ್ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
