ಸಕಲೇಶಪುರ ಪಟ್ಟಣದ ಕುಡುಗರಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: 20 ದಿನಗಳಿಂದ ಹೊಳೆಯ ನೀರು ಸರಬರಾಜು – ಸಾರ್ವಜನಿಕರ ಆಕ್ರೋಶ.
ಸಕಲೇಶಪುರ: ಪಟ್ಟಣದ ಕುಡುಗರಹಳ್ಳಿ ವಾರ್ಡ್ ನಂ. 22ರಲ್ಲಿ ಕಳೆದ ಸುಮಾರು 20 ದಿನಗಳಿಂದ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡದೆ ನೇರವಾಗಿ ಹೊಳೆಯ ನೀರನ್ನು ಬಿಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ನೀರನ್ನು ಕುಡಿಯುತ್ತಿರುವುದರಿಂದ ಮಕ್ಕಳು ಸೇರಿದಂತೆ ಸ್ಥಳೀಯ ನಿವಾಸಿಗಳಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಸಮಸ್ಯೆಯನ್ನು ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದಾಗ, “ಮೋಟಾರ್ ಕೆಟ್ಟು ಹೋಗಿದೆ” ಎಂಬ ಕಾರಣವನ್ನು ನೀಡಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈಗಾಗಲೇ ಬೇಸಿಗೆ ಕಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ, ಸರಿಯಾದ ಕುಡಿಯುವ ನೀರಿನ ಕೊರತೆ ಮತ್ತಷ್ಟು ತೀವ್ರವಾಗಿದ್ದು, ಅಶುದ್ಧ ನೀರಿನ ಬಳಕೆಯಿಂದ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಕುಡುಗರಹಳ್ಳಿ ನಿವಾಸಿ ಕುಮಾರ್ ಅವರು, “ಪುರಸಭೆ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಕೆಟ್ಟಿರುವ ಮೋಟಾರನ್ನು ದುರಸ್ತಿಗೊಳಿಸಿ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜನರು ಇನ್ನಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ” ಎಂದು ಆಗ್ರಹಿಸಿದ್ದಾರೆ.
ಸ್ಥಳೀಯರು ಕೂಡಲೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಪುರಸಭೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
previous post
next post
