ಸಕಲೇಶಪುರ: ತಾಲೂಕಿನ ಚಂಗಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿಯಲ್ಲಿ ವಿವಿಧ ಪಕ್ಷಗಳಿಗೆ ಸೇರಿದ ಕಾರ್ಯಕರ್ತರು ಹಾಗೂ ಮತದಾರರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡ ಘಟನೆ ನಡೆಯಿತು.
ತಾಲೂಕು ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷರಾದ ಮುರುಳಿ ಮೋಹನ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳು ಹಾಗೂ ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತರಾಗಿ ಅನೇಕರು ಪಕ್ಷ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ಜೆಡಿಎಸ್ ಪಕ್ಷದ ಅಶೋಕ್ ಕುಮಾರ್ ಮತ್ತು ಸೋಮಯ್ಯ, ಬಿಎಸ್ಪಿ ಪಕ್ಷದ ದೇವಪ್ಪ ಹಾಗೂ ಗಣೇಶ್ ಸೇರಿದಂತೆ ವಿವಿಧ ಪಕ್ಷಗಳಲ್ಲಿ ಸಕ್ರಿಯರಾಗಿದ್ದ ಕಾರ್ಯಕರ್ತರು ಹಾಗೂ ಮತದಾರರಾದ ಪ್ರತಾಪ್, ಲೋಲಾಕ್ಷಿ, ರಂಗಮ್ಮ, ಚೆನ್ನಮ್ಮ, ಚಂದನ, ಹೊನ್ನೇಶ್, ಪೂಜಾ, ಸುರೇಶ್, ಸಾವಿತ್ರಿ, ಚನ್ನಬಸಮ್ಮ, ಕಾರ್ತಿಕ್, ದಿನೇಶ್ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುರುಳಿ ಮೋಹನ್ ಅವರು, ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಪ್ರತಿಯೊಂದು ಮನೆಗೂ ತಲುಪಿಸುವುದು ಹಾಗೂ ತಾಲೂಕಿನಲ್ಲಿ ಕಾಂಗ್ರೆಸ್ ಸಂಘಟನೆ ಬಲಪಡಿಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು. ಜನಪರ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮುಂದುವರಿಯುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬಗರ್ ಹುಕುಂ ಸಮಿತಿ ಸದಸ್ಯರಾದ ಹೆಚ್.ಹೆಚ್. ಉದಯ್, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಕೆ.ಪಿ. ಕೃಷ್ಣೇಗೌಡ, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಪ್ರೀತಮ್, ನಾಗೇನಹಳ್ಳಿ ಪಮ್ಮಿ, ಹಿತೈಸಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


