ಸಕಲೇಶಪುರದಲ್ಲಿ “ವೈಚಾರಿಕ ಸಂಜೆ” ದಿನಪತ್ರಿಕೆಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.
ಸಕಲೇಶಪುರ : ತಾಲೂಕಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಣ ಪಡೆದು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡ 90ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಎಸ್.ಎಸ್.ಎಲ್.ಸಿ ಕನ್ನಡ ಐಚ್ಛಿಕ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದು ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವ ಉದ್ದೇಶದಿಂದ “ವೈಚಾರಿಕ ಸಂಜೆ” ದಿನಪತ್ರಿಕೆ ವತಿಯಿಂದ ಎರಡನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ದಿನಾಂಕ 25.05.2026ರ ಸೋಮವಾರ ಬೆಳಗ್ಗೆ 11 ಗಂಟೆಗೆ ಸಕಲೇಶಪುರ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಯಶೋಗಾಥೆ ಸಮಾಜದ ಮುಂದೆ ಮಾದರಿಯಾಗಬೇಕು ಹಾಗೂ ಇತರ ವಿದ್ಯಾರ್ಥಿಗಳಲ್ಲೂ ಆತ್ಮವಿಶ್ವಾಸ ಮತ್ತು ಸ್ಪೂರ್ತಿ ಮೂಡಿಸಬೇಕು ಎಂಬ ಆಶಯವನ್ನು “ವೈಚಾರಿಕ ಸಂಜೆ” ದಿನಪತ್ರಿಕೆ ಹೊಂದಿದೆ.
ಈ ಕುರಿತು ಮಾಹಿತಿ ನೀಡಿರುವ “ವೈಚಾರಿಕ ಸಂಜೆ” ದಿನಪತ್ರಿಕೆಯ ಸಂಪಾದಕರಾದ ಬ್ಯಾಕರವಳ್ಳಿ ವೆಂಕಟೇಶ್, “ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನನ್ಯವಾದುದು. ಅವರಿಗೆ ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹ ಸಿಕ್ಕಾಗ ಇನ್ನಷ್ಟು ದೊಡ್ಡ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸುವ ಜೊತೆಗೆ, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ನೀಡುವ ಕಾರ್ಯವನ್ನು ನಮ್ಮ ದಿನಪತ್ರಿಕೆ ಮಾಡುತ್ತಿದೆ” ಎಂದು ತಿಳಿಸಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಯಶಸ್ಸು ಇತರ ಮಕ್ಕಳಿಗೆ ದಾರಿದೀಪವಾಗಲಿ ಎಂಬ ಆಶಯದೊಂದಿಗೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
song ಕ್ರಿಯೇಟೆಡ್ by
ಅರುಣ್ ಗೌಡ ಕರಡಿಗಾಲ
ವರದಿಗಾರರು, ಸಕಲೇಶಪುರ ತಾಲ್ಲೂಕು
previous post
