🔴ಜೂನ್ 5ರಂದು ವಳಲಹಳ್ಳಿಕೂಡಿಗೆಯಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಿ : ಗಗನ್ ಹಾಡ್ಲಹಳ್ಳಿ
ಸಕಲೇಶಪುರ : ವೈಚಾರಿಕ ಸಂಜೆ ದಿನಪತ್ರಿಕೆ ಮತ್ತು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ )ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 5ರಂದು ಹೆತ್ತೂರು ಹೋಬಳಿಯ ವಳಲಹಳ್ಳಿಕೂಡಿಗೆಯ ಹೆಚ್.ಡಿ. ದೇವೇಗೌಡ ವಕ್ಕಲಿಗರ ಸಮುದಾಯ ಭವನದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಕಲೇಶಪುರ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಘಟಕದ ಅಧ್ಯಕ್ಷ ಗಗನ್ ಗೌಡ ಹಾಡ್ಲಹಳ್ಳಿ ಮನವಿ ಮಾಡಿದ್ದಾರೆ.
ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯುವ ಈ ಆರೋಗ್ಯ ಶಿಬಿರವನ್ನು ಆದಿಚುಂಚನಗಿರಿ ಆಸ್ಪತ್ರೆ, ವೈಚಾರಿಕ ಸಂಜೆ ದಿನಪತ್ರಿಕೆ, ವಳಲಹಳ್ಳಿ ಗ್ರಾಮ ಪಂಚಾಯಿತಿ, ಬೆಳೆಗಾರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸಕಲೇಶಪುರ ಘಟಕ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸಂಯುಕ್ತವಾಗಿ ಆಯೋಜಿಸಿದ್ದಾರೆ.
ಶಿಬಿರದಲ್ಲಿ ಹೃದ್ರೋಗ, ಮಧುಮೇಹ, ಕಣ್ಣು, ಕಿವಿ-ಮೂಗು-ಗಂಟಲು, ಕೀಲು ಮತ್ತು ಮೂಳೆ, ಶಸ್ತ್ರಚಿಕಿತ್ಸೆ, ಸ್ತ್ರೀರೋಗ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಭಾಗವಹಿಸಿ ಉಚಿತ ತಪಾಸಣೆ ಹಾಗೂ ಆರೋಗ್ಯ ಸಲಹೆ ನೀಡಲಿದ್ದಾರೆ. ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೂ ವಿಶೇಷ ಚಿಕಿತ್ಸೆ ಹಾಗೂ ಸಲಹೆ ವ್ಯವಸ್ಥೆ ಮಾಡಲಾಗಿದೆ.
ಇದಲ್ಲದೆ ಉಚಿತ ಇಸಿಜಿ, ರಕ್ತಪರೀಕ್ಷೆ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳು ನಡೆಸಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ಆದಿಚುಂಚನಗಿರಿ ಆಸ್ಪತ್ರೆಗೆ ಉಚಿತ ವಾಹನ ವ್ಯವಸ್ಥೆಯೊಂದಿಗೆ ಕರೆದೊಯ್ಯುವ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ.
ಕಾರ್ಯಕ್ರಮವನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಲಿದ್ದು, ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು, ವೈದ್ಯರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.
ಗ್ರಾಮೀಣ ಭಾಗದ ಜನರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಉಚಿತವಾಗಿ ಇಂತಹ ಉತ್ತಮ ವೈದ್ಯಕೀಯ ಸೇವೆಗಳು ದೊರೆಯುತ್ತಿರುವುದು ಅಪರೂಪವಾಗಿದ್ದು, ಪ್ರತಿಯೊಬ್ಬರೂ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಗಗನ್ ಗೌಡ ಹಾಡ್ಲಹಳ್ಳಿ ತಿಳಿಸಿದ್ದಾರೆ.

