ಮಾಜಿ ಸಚಿವ ಹೆಚ್. ಕೆ. ಕುಮಾರಸ್ವಾಮಿ ಅವರಿಂದ ಮಾನವೀಯ ಸ್ಪಂದನೆ: ಸ್ವಂತ ಹಣದಲ್ಲಿ ರಸ್ತೆ ಗುಂಡಿ ಮುಚ್ಚಿಸಿ ಗ್ರಾಮಸ್ಥರ ಮೆಚ್ಚುಗೆ
ಸಕಲೇಶಪುರ:- ತಾಲೂಕಿನ ಹೆತ್ತೂರು ಹೋಬಳಿಯ ಹೊಂಗಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಗಳ್ಳಿ ಗ್ರಾಮಕ್ಕೆ ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಹೆಚ್. ಕೆ. ಕುಮಾರಸ್ವಾಮಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಗ್ರಾಮದ ಮುಖ್ಯ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಮನವಿ ಸಲ್ಲಿಸಿದರು.
ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದ ಮಾಜಿ ಸಚಿವರು, ತಕ್ಷಣ ಸ್ಪಂದಿಸಿ ತಮ್ಮ ವೈಯಕ್ತಿಕ ಹಣದಲ್ಲಿ ರಸ್ತೆಯಲ್ಲಿದ್ದ ಗುಂಡಿಗಳನ್ನು ಮುಚ್ಚಿಸುವ ಮೂಲಕ ತಾತ್ಕಾಲಿಕ ಪರಿಹಾರ ಕಲ್ಪಿಸಿದರು.
ಜನಪ್ರತಿನಿಧಿಯಾಗಿ ಮಾತ್ರವಲ್ಲದೆ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಸಾಮಾಜಿಕ ಕಾಳಜಿಯಿಂದ ಅವರು ಕೈಗೊಂಡ ಈ ಕಾರ್ಯಕ್ಕೆ ಯರಗಳ್ಳಿ ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
“ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಮನೋಭಾವ ಶ್ಲಾಘನೀಯ. ಗ್ರಾಮೀಣ ಭಾಗದ ಜನರ ಸಂಕಷ್ಟಗಳಿಗೆ ಸ್ಪಂದಿಸಿದ ಮಾಜಿ ಸಚಿವರ ಕಾರ್ಯ ಪ್ರಶಂಸನೀಯ” ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು.
ಗ್ರಾಮದ ರಸ್ತೆ ಸಮಸ್ಯೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಸಂಬಂಧಪಟ್ಟ ಇಲಾಖೆಗಳು ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರ ಒದಗಿಸಬೇಕು ಎಂಬುದು ಗ್ರಾಮಸ್ಥರ ಆಶಯವಾಗಿದೆ.


