****
ನಾಗೇಶ್ ಎಂ ಎಚ್ ಮಾಗೇರಿ
‘🔴ಸಮಾಜ ಕಲ್ಯಾಣ ಇಲಾಖೆಗೆ ಶೀಘ್ರ ಸಚಿವರ ನೇಮಕ ಮಾಡಿ’ – ಶಾಸಕ ಸಿಮೆಂಟ್ ಮಂಜು.
🔴ಸಚಿವರಿಲ್ಲದೆ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆ;
🔴ಐಹಳ್ಳಿಯಲ್ಲಿ ₹50 ಲಕ್ಷ ರಸ್ತೆ ಕಾಮಗಾರಿಗೆ ಶಾಸಕ ಸಿಮೆಂಟ್ ಮಂಜು ಚಾಲನೆ
ಸಕಲೇಶಪುರ: ಸಮಾಜ ಕಲ್ಯಾಣ ಇಲಾಖೆಗೆ ಇನ್ನೂ ಸಚಿವರನ್ನು ನೇಮಕ ಮಾಡದಿರುವುದರಿಂದ ಇಲಾಖೆಯ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಮುಖ್ಯಮಂತ್ರಿ ಅವರು ಶೀಘ್ರವೇ ಸಚಿವರನ್ನು ನೇಮಿಸಿ, ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವೇಗ ನೀಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಆಗ್ರಹಿಸಿದರು.
ತಾಲೂಕಿನ ಐಹಳ್ಳಿ ಗ್ರಾಮದ ಪರಿಶಿಷ್ಟ ಜನಾಂಗದ ವಸತಿ ಪ್ರದೇಶದಲ್ಲಿ ಸುಮಾರು ₹50 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಐಹಳ್ಳಿ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜನಾಂಗದ ಕುಟುಂಬಗಳು ವಾಸವಾಗಿದ್ದು, ರಸ್ತೆ ಹದಗೆಟ್ಟ ಕಾರಣ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲಾಗಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಂಡರೆ ಈ ಭಾಗದ ಜನರ ಹಲವು ವರ್ಷಗಳ ಬೇಡಿಕೆ ಈಡೇರುವುದಾಗಿ ಹೇಳಿದರು.
ಈ ಪ್ರದೇಶದಲ್ಲಿ ರಸ್ತೆ ಮಾತ್ರವಲ್ಲದೆ ಕುಡಿಯುವ ನೀರು, ಚರಂಡಿ ಸೇರಿದಂತೆ ಇನ್ನೂ ಹಲವು ಮೂಲಭೂತ ಸೌಕರ್ಯಗಳ ಕೊರತೆ ಇರುವುದನ್ನು ಗಮನಿಸಿದ್ದೇನೆ. ಅವುಗಳನ್ನು ಹಂತ ಹಂತವಾಗಿ ಪರಿಹರಿಸಿ, ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಚಿವರಿಲ್ಲದ ಇಲಾಖೆ ಅಭಿವೃದ್ಧಿಗೆ ಹಿನ್ನಡೆ
ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರೂ ಸಮಾಜ ಕಲ್ಯಾಣ ಇಲಾಖೆಗೆ ಇನ್ನೂ ಸಚಿವರನ್ನು ನೇಮಕ ಮಾಡಿಲ್ಲ. ಒಂದು ಇಲಾಖೆಗೆ ಸಚಿವರಿಲ್ಲದಿದ್ದರೆ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ವಿಳಂಬವಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿ ಅವರು ಸಮಾಜ ಕಲ್ಯಾಣ ಇಲಾಖೆಗೆ ಆದಷ್ಟು ಬೇಗ ಸಚಿವರನ್ನು ನೇಮಕ ಮಾಡಿ, ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಹೆಚ್ಚಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕಾರ್ತಿಕ್ ಮುಖಂಡರಾದ ಬಸವರಾಜ್, ಪ್ರಸನ್ನ ಕುಣಿಗಲ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
