ವಳಲಹಳ್ಳಿ–ಹೆತ್ತೂರು ರಸ್ತೆಯಲ್ಲಿ ಕೋಳಿ ತ್ಯಾಜ್ಯ ವಿಲೇವಾರಿ: ಸಾರ್ವಜನಿಕರಿಂದ ಆಕ್ರೋಶ
ದುರ್ವಾಸನೆ, ಅಸ್ವಚ್ಛತೆಯಿಂದ ಸಂಚಾರಕ್ಕೆ ತೊಂದರೆ; ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯ
ಸಕಲೇಶಪುರ: ವಳಲಹಳ್ಳಿ ಕೂಡಿಗೆಯಿಂದ ಹೆತ್ತೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಅಕ್ಕಪಕ್ಕದಲ್ಲಿ ಕೋಳಿ ತ್ಯಾಜ್ಯವನ್ನು ಅನಧಿಕೃತವಾಗಿ ಸುರಿಯಲಾಗುತ್ತಿದ್ದು, ದುರ್ವಾಸನೆ ಹಾಗೂ ಅಸ್ವಚ್ಛತೆಯಿಂದ ಸಾರ್ವಜನಿಕರು ಮತ್ತು ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಈ ರಸ್ತೆಯ ಮೂಲಕ ರೈತರು ತಮ್ಮ ಗದ್ದೆ-ತೋಟಗಳಿಗೆ ಪ್ರತಿನಿತ್ಯ ಸಂಚರಿಸುತ್ತಿದ್ದು, ರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಓಡಾಡಲು ತೊಂದರೆ ಉಂಟಾಗಿದೆ. ದುರ್ವಾಸನೆಯಿಂದ ಸ್ಥಳೀಯ ನಿವಾಸಿಗಳು, ವಾಹನ ಸವಾರರು ಹಾಗೂ ರೈತರು ಸಮಸ್ಯೆ ಎದುರಿಸುತ್ತಿದ್ದು, ಪರಿಸರ ಮಾಲಿನ್ಯದ ಭೀತಿಯೂ ಕಾಡುತ್ತಿದೆ.
ಕೋಳಿ ತ್ಯಾಜ್ಯ ವಿಲೇವಾರಿಗೆ ಗ್ರಾಮ ಪಂಚಾಯಿತಿಯಿಂದ ಯಾವುದೇ ಪರವಾನಗಿ ನೀಡಲಾಗಿದೆಯೇ ಎಂಬುದನ್ನು ಪರಿಶೀಲಿಸಿ, ನಿಯಮ ಉಲ್ಲಂಘನೆಯಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯ ಸುರಿಯುವುದನ್ನು ತಕ್ಷಣ ನಿಲ್ಲಿಸಿ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸುವಂತೆ ಹಿರಿಯೂರು ಗ್ರಾಮದ ಉಮೇಶ್ ಒತ್ತಾಯಿಸಿದ್ದಾರೆ.
previous post
next post
